ಭಾನುವಾರ, ಆಗಸ್ಟ್ 18, 2013

Kannada Lavani sahitya-Dr.Khade

 ವಿಶೇಷ ಲೇಖನ :

                                                   ಕನ್ನಡ ಲಾವಣಿ ಸಾಹಿತ್ಯ

                                                    -ಡಾ.ಪ್ರಕಾಶ ಗ.ಖಾಡೆ
       
     ಕನ್ನಡ ಕಾವ್ಯಕ್ಕೆ ಜೀವ ಕಳೆ ತಂದ ಲಾವಣಿ ಪ್ರಧಾನವಾಗಿ ಶೃಂಗಾರ ಕಾವ್ಯ. ಕಾಲಾಂತರದಲ್ಲಿ ಅವುಗಳ ಜನಪ್ರಿಯತೆಯು ಸ್ಥಳೀಯ ಸಂದರ್ಭ ಮತ್ತು ಪರಿಸ್ಥಿತಿಗಳಿಗನುಗುಣವಾಗಿ ಬದಲಾದ ವಸ್ತುವಿಗೆ ಬಳಸಿಕೊಳ್ಳಬೇಕಾಯಿತು.ಮರಾಠಿ ಸಾಹಿತ್ಯದಲ್ಲಿ ಲಾವಣಿಗೆ ಹೆಚ್ಚು ಮೌಲಿಕತೆ ಪ್ರಾಪ್ತವಾಗಿದೆ. ಮರಾಠಿಯಿಂದ ಗುಳೇ ಬಂದು ‘ದಕ್ಷಿಣ ಮಹಾರಾಷ್ಟ್ರ’ವೇ ಆಗಿದ್ದ ಉತ್ತರ ಕರ್ನಾಟಕದ ಗಡಿಯಲ್ಲಿ ಲಾವಣಿಯ ಲಾವಣ್ಯ ರಸಬಳ್ಳಿಯಂತೆ ಹಬ್ಬಿದೆ. ‘‘ಮರಾಠಿ ಮತ್ತು ಕನ್ನಡ ಸಾಹಿತ್ಯದ ಆದಾನ ಪ್ರದಾನದ ಮಹತ್ವದ ಕೊಂಡಿ ಲಾವಣಿ ಸಾಹಿತ್ಯ’’ ಎನ್ನುತ್ತಾರೆ ವಾಮನ ಬೇಂದ್ರೆಯವರು. ಸರ್ವ ಸಾಮಾನ್ಯ ಜನತೆಯ ಮನೋರಂಜನೆಗಾಗಿ ಜನತೆಗೆ ಹಿಡಿಸುವಂತೆ ಲೌಕಿಕ, ಪೌರಾಣಿಕ ಮತ್ತು ಆಧ್ಯಾತ್ಮಿಕ ವಿಷಯಗಳ ಮೇಲೆ ರಚಿಸಿದ ಕಥೆ, ಡೋಲಕದ ತಾಳ ಹಿಡಿದು, ವಿಶಿಷ್ಟ ರೀತಿಯಲ್ಲಿ ಹಾಡುವ ವಿಶೇಷ ಪದ್ದತಿಯ, ಹಾಡಲು ಸರಳತೆಯನ್ನೊಳಗೊಂಡ ಪದ್ಮಾವರ್ತನೀ ಎಂಟು ಮಾತ್ರೆಗಳ ಆವರ್ತನೆ  ಮತ್ತು ಭೃಂಗಾವರ್ತನೀ ಆರು ಮಾತ್ರೆಗಳ ಆವರ್ತನ ಉಳ್ಳ ರಚನೆಗಳೇ ಲಾವಣಿಗಳು ಎಂಬ ನಿರ್ಣಯವನ್ನು ಮರಾಠಿ ಸಾಹಿತ್ಯ ವಿಮರ್ಶಕರು ನಮೂದು ಮಾಡಿದ್ದಾರೆ.
   ಪೇಶವೆ ಕಾಲದ ಅನಂತರದಲ್ಲಿ 19 ಮತ್ತು 20ನೆಯ ಶತಮಾನಗಳಲ್ಲಿ ಮರಾಠಿ ಮತ್ತು ಕನ್ನಡ ಲಾವಣಿ ಸಾಹಿತ್ಯಕ್ಕೆ ರಾಜಕೀಯ ಮತ್ತು ಸಾಮಾಜಿಕ ಸ್ವರೂಪ, ವೈವಿಧ್ಯ ಪ್ರಾಪ್ತವಾಯಿತು. ಭಾರತ ಸ್ವಾತಂತ್ರ್ಯ ಆಂದೋಲನ ಮತ್ತು ಸ್ವಾತಂತ್ರ್ಯೋತ್ತರ ಕಾಲದಲ್ಲಿ ಯೋಜನೆಗಳ ಪ್ರಚಾರಕ್ಕೆ ಬಹುವಾಗಿ ಬಳಕೆಯಾಯಿತು.
ಸರಸೋತಿ ನಿಮ್ಮ ಸ್ತುತಿ
ಸಬಾದಾಗ ಬಂದ ನಿಂತ  ನಾ ನಾಗೇಶಿ
ಚರಣಕ್ಕೆರಗಿ ಕರುಣ ಮಾಡಿ ಕೈ ಮುಗದ
ಕಾಯ ಒಡಿತೇವ ನಾವು ನಮಸ್ಕರಿಸಿ
 ಶಬ್ದಸೃಷ್ಟಿಯ ಸರಸ್ವತಿಯನ್ನು ಕೈ ಮುಗಿದು ತಮ್ಮ ನಾಲುಗೆಯ ನುಡಿ ಸಾಲುಗಳಿಗೆ ಆಹ್ವಾನಿಸಿಕೊಳ್ಳುವ ಜನಪದರು ದೈವದಲ್ಲಿ ಇಟ್ಟ ನಂಬುಗೆಯಿಂದ ಸದಾ ಜಾಗೃತ ಮತ್ತು ಪವಿತ್ರ ನೆಲೆಯನ್ನು ತಮ್ಮ ಪರಿಸರದಲ್ಲಿ ಕಟ್ಟಿಕೊಳ್ಳುತ್ತಾರೆ.  ಲಾವಣಿಗಳು ತೀರಾ ಆಪ್ತವಾಗುವುದು ಅವುಗಳ ಕಾವ್ಯ ಸೌಂದರ್ಯ ಮತ್ತು ಜನರಾಡುವ ಮಾತಿನ ಕಾವ್ಯ ಶಕ್ತಿಯಿಂದ. ವಾಸ್ತವ ಬದುಕಿನ ಹಲವಾರು ಮಜಲುಗಳನ್ನು ಇವು ತೆರೆದಿಡುತ್ತವೆ. ತನ್ನ ಗಂಬಿsೀರತೆ, ಶೃಂಗಾರ, ಟೀಕೆ, ಮೊನಚಾದ ಪ್ರತಿಕ್ರಿಯೆಗಳಿಂದ ನೀತಿ ಬೋಧನೆಯನ್ನು ಪ್ರಧಾನವಾಗಿಸಿಕೊಂಡಿವೆ.
ಈ ಮನಾ ಅಂಬೂದು ಉಡಾಳ ದನಾ ಹಾಕ ಮುಗದಾನಾ
ಹಗ್ಗಾ ಹಿಡಿ ಜಗ್ಗಿ ಅದು ನಡೂತೈತಿ ತಲೆಬಾಗಿ
ಸಡ್ಲ ಬಿಟ್ಟಿಂದ ಜಿಗದಾಡತೈತಿ ಟುಣ ಟುಣಾ ಅಡ್ನಾಡ ಅವಗುಣಾ
ಅಸ್ಕೋತೈತಿ ಹೋಗಿ ಕೆಡವಿತ ನಿನ್ನ ಯಮಬಾದಿನಿ
ಹರಿದಾಡುವ ಮನಸ್ಸಿಗೆ ಮುಗದಾನ ಹಾಕಿ ಕಟ್ಟಿ ಬದುಕು ರೂಪಿಸಿಕೊಳ್ಳಬೇಕೆಂದು ನೀತಿಯನ್ನು ಸಾರುವ ಲಾವಣಿಕಾರರು ತಮ್ಮ ಸ್ಥಳೀಯ, ತಾವು ಕಂಡ ಪರಿಸರದ ವಸ್ತು ಸಂಗತಿಗಳಿಂದಲೇ ಕಾವ್ಯದ ಸೆಳಕುಗಳನ್ನು  ನೀಡುತ್ತಾರೆ.
    ಲಾವಣಿಕಾರರ ಕಾವ್ಯಶ್ರೇಷ್ಠತೆ ಇರುವುದು ಅವರು ಸ್ಥಳೀಯವಾಗಿ ದೊರಕಿಸಿಕೊಳ್ಳುವ  ಉದಾಹರಣೆಗಳಲ್ಲಿ. ಅತಿ ರಂಜಿತವಲ್ಲ, ಅತಿ ಬಿಗುವಲ್ಲದ ಮತ್ತು ಹಾಗೆಂದು ತೋರುಗೊಡುವ ಪದಪುಂಜಗಳನ್ನೂ ಸನಿಹಕ್ಕೂ ತರಸಿಕೊಳ್ಳದೆ ತಾನು ಕಂಡ ಪರಿಸರ ಸಾಮಗ್ರಿಯನ್ನು ಎತ್ತಿಕೊಳ್ಳುವುದು ಅವರ ವಿಶೇಷತೆ. ರಾಮ, ಲಕ್ಷ್ಮಣ, ಸೀತೆಯರ ವನವಾಸ ಪ್ರಸಂಗ ಚಿತ್ರಿತವಾಗಿರುವುದನ್ನು ಗಮನಿಸಿದಾಗ ಈ ಮಾತು ಇನ್ನೂ ಸ್ಪಷ್ಟವಾಗುತ್ತದೆ.
ಕಲ್ಲನಾರ ಮಡಿಯನುಟ್ಟ ಹುಲ್ಲ ಹಾಂವ ಚೇಳಿನಾಗ
ಜಲ್ಲಹತ್ತಿ ತಿರಗತಾರ ಬರಿಗಾಲಾ
ಹುಣಚಿ ಹುಲ್ಲ ಬೀಜ ತಿಂಬತಾರ ಹೆಂತಾಕಾಲಾ
ಕಾರಿಕಾಯಿ ಬಾರಿಕಾಯಿಗಳ ಹಣ ಹಂಪಲಾ
ಮನಿಯಿಲ್ಲ ಮಾರಯಿಲ್ಲ ತೋಸಿಕೊಂಡ ಒಣಗತಾರ
ಆರತಿಂಗಳಗಟ್ಲೆ ಥಂಡಿ ಮಳಿಗಾಲಾ ಬಾಸಿಗಿ ಬಿಸಿಲಾ
ಇಲ್ಲಿ ಬಳಸಿರುವ ಕಲ್ಲನಾಗರ, ಬರಿಗಾಲ, ಹುಣಚಿಬೀಜ, ಕಾರಿಕಾಯಿ, ಬಾರಿಕಾಯಿ ‘ಮನಿಯಿಲ್ಲ ಮಾರಯಿಲ್ಲ’ ‘ತೋಸಿಗೊಂಡ ಒಣಗತಾರ’ ಥಂಡಿ.... ಹೀಗೆ ಪ್ರತಿ ಸಾಲಿನಲ್ಲಿ ಬಳಕೆಯಾದ ಆಡುಮಾತಿನ  ಗಟ್ಟಿತನದ ಪದಗಳು ಜನಪದರ ದೇಸೀ ಕಾವ್ಯದ ಭಾಷಾಸತ್ವವನ್ನು ನಿರೂಪಿಸುತ್ತವೆ.
ಚರಿತ್ರೆ
 ಸಮಕಾಲೀನ ಸಂಗತಿ ಮತ್ತು ಚಾರಿತ್ರಿಕ ಅಂಶಗಳನ್ನು ಒಳಗೊಂಡ ಲಾವಣಿಗೀತ ಪ್ರಕಾರವು ಕನ್ನಡದ ಇತಿಹಾಸವನ್ನು ಕಟ್ಟಿಕೊಡುವ ಮೂಲಕ ಪರಂಪರೆಯ ಶ್ರೇಷ್ಠ ದಾಖಲೆಗಳೆನಿಸಿವೆ. 1897ರಲ್ಲಿ ಭಾರತಕ್ಕೆ ಬಂದ ಜಾನ್ ಫೇತ್‍ಪುಲ್ ಪಿs್ಲೀಟರು ಬಂದ ಒಂದೆರಡು ವರ್ಷಗಳಲ್ಲಿಯೇ ಉತ್ತರ ಕರ್ನಾಟಕದಲ್ಲಿ ಆಡಳಿತಾದಿsಕಾರ ವಹಿಸಿಕೊಂಡು ಕನ್ನಡ ಕಲಿತು, ಆ ಕಾಲಕ್ಕೆ ಜನಪದರಲ್ಲಿ ಹಾಡಿಕೊಂಡು ಬಂದ ಲಾವಣಿಗಳಿಗೆ ಮನಸೋತು ಅವುಗಳ ಸಂಗ್ರಹಕ್ಕೆ ನಿಂತ ಕಾರಣವಾಗಿ ಬ್ರಿಟಿಷರ ವಿರುದ್ಧ ದೇಸೀಯರು ತೋರಿದ ಪ್ರತಿಕ್ರಿಯೆಯ ಚಳವಳಿ ಪ್ರಕಟವಾಗುವಂತಾಯಿತು. ಸಂಗೊಳ್ಳಿ ರಾಯಣ್ಣ, ಹಲಗಲಿ ಬೇಡರು ಐತಿಹಾಸಿಕ ವೀರರಾಗಿ ಚಿತ್ರಿಸಿದ ಇಂಥ ಚಾರಿತ್ರಿಕ ಲಾವಣಿಗಳು. ನಿಶ್ಯಸ್ತ್ರೀಕರಣ ಕಾಯಿದೆ, ದತ್ತು ಮಕ್ಕಳಿಗೆ ಹಕ್ಕಿಲ್ಲ ಕಾಯಿದೆ, ಆದಾಯ ತೆರಿಗೆ ವಿರುದ್ಧ ನಡೆದ  ಬಂಡಾಯವನ್ನು ಚಿತ್ರಿಸಿದರು. ಜೊತೆಗೆ ವಸಾಹತುಶಾಹಿ ಸ್ಥಳೀಯ ಸಂಸ್ಕøತಿಯ ಮೇಲೆ ಉಂಟುಮಾಡಿದ ಬಹುದೊಡ್ಡ ಅನ್ಯಾಕ್ರಮಣವನ್ನೂ ಕಂಡಂತೆ ಹಾಡಿ ತೋರಿಸಿದವು. ಬಾದಾಮಿ ಕೋಟೆಯನ್ನು ‘ಕುಂಪಣಿ’ಯವರು ಕೆಡವಿಸಿದ್ದರ ವಸ್ತುವನ್ನೊಳಗೊಂಡ ಪಿs್ಲೀಟರು ಸಂಗ್ರಹಿಸಿದ ಒಂದು ಪದ ಹೀಗಿದೆ:
ಕುಂಪಣಿಯವರು ಮಾಡ್ಯಾರ ಸಂವಾರ
ನಾಡಮೇಗಿನ ಜನಾ ಮರುಗಿತೋ ಮರಮರಾ
ಸರಕಾರ ಬಂದು ಕೆಡವಿದ ಮೇಲೆ ಯಾರಿಲ್ಲ ಈ ಧರಾ
ಕಳಸ ಇಲ್ಲದಾ ತೇರಿನ ಗತಿ ಬದಾಮಿ ಶೃಂಗಾರಾ
ಕರ್ನಾಟಕ ಪ್ರಾಂತಕ್ಕ ಆಧಾರ ಇತ್ತ ಈ ಗಡಾ
ಬಡಕೊಂಡು ಹೋದರೂ ಕೇಳವರ್ಯಾರಿಲ್ಲ ನಾಡಾ
ಬ್ರಿಟಿಷರು ನಮ್ಮ ನಾಡನ್ನು ಅದೆಂತು ಆಕ್ರಮಿಸಿಕೊಂಡರು ಎಂಬುದನ್ನು ಬಿಡಿಸಿಡುವ ಈ ಬಗೆಯ ಲಾವಣಿಗಳು ಚರಿತ್ರೆಯನ್ನು ಬಿಚ್ಚಿಡುವಲ್ಲಿ ಪ್ರಧಾನ ದಾಖಲೆಗಳಾದವು. ಸಂಗೊಳ್ಳಿ ರಾಯಣ್ಣ, ಆದಾಯ ತೆರಿಗೆ, ಹಲಗಲಿಯ ಬೇಡರು, ಕಿತ್ತೂರ ಚೆನ್ನವ್ವನ ಸೊಸೆ, ಲಾವಣಿ ಪದಾ, ಬಾದಾಮಿ ಕಿಲೆ ಕೆಡವಿದ ಪದಾ, ಇಂಗ್ರೇಜಿ ಸಂಸ್ಥಾನದ ಮೇಲಿನ ಪದಾ ಮೊದಲಾದ ಲಾವಣಿಗಳನ್ನು ಗಮನಿಸಿದಾಗ ಅಲ್ಲಿ ಕನ್ನಡ ದೇಸೀ ಚಳವಳಿಗಾರರ ದಿಟ್ಟತನ, ಪರಕೀಯರ ಕುತಂತ್ರ, ಸ್ಥಳೀಯರ ರೋಷ ಎಲ್ಲವನ್ನು ಪದಕಟ್ಟಿ ಹಾಡುವಲ್ಲಿ ಲಾವಣಿಕಾರರು ಆಗ ಇದ್ದ ಅದಿsಕಾರಿಶಾಹಿಯ ವಿರುದ್ಧವೇ ಬಂಡೆದ್ದು ಹಾಡಿದ್ದೂ ಒಂದು ದಾಖಲಾದ ಸಂಗತಿಯಾಗುತ್ತದೆ.
        ಜನರ ನೆಮ್ಮದಿಯ ಹತಗೊಳಿಸಿ ಕುತಂತ್ರದಿಂದ ತಂದ ಅನೇಕ ಕಾಯಿದೆಗಳು ಲಾವಣಿಕಾರರ ರೋಷಕ್ಕೆ ಕಾರಣವಾದವು. ಒಂದು ಬಗೆಯಲ್ಲಿ ಜನಸಮೂಹವನ್ನು ಬ್ರಿಟಿಷ್ ವಿರೋದಿs ನೆಲೆಯಲ್ಲಿ ಸಜ್ಜುಗೊಳಿಸಲು ಸ್ಥಳೀಯ ಈ ಹಾಡುಗಾರರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಸಿಡಿದೆದ್ದ ಕಿಡಿಗಳಾಗುತ್ತಾರೆ. ‘ಆದಾಯ ತೆರಿಗೆ’ ಉಂಟುಮಾಡಿದ ಶೋಷಣೆಯನ್ನು ‘ಏನ ಹೇಳಲಿ ಜನ್ಮದ ಗೋಳಾ ಇಂಗ್ರಜಿ ಉಪದರ ಆದೀತ ಭಾಳಾ. ಬಡವರ ಅಳತಾರೊ ಗಳಗಳಾ ಮಾಡತಾರ ಚಿಂತಿ’ ಎಂದು ಚಿತ್ರಿಸಿದರು. ಈ ಚಿತ್ರಣದಲ್ಲಿ ‘ಬ್ರಿಟಿಷರ ದಬ್ಬಾಳಿಕೆಯ ಮತ್ತೊಂದು ಕ್ರೂರನೋಟ ಇಲ್ಲಿದೆ. ಹೀಗೆ ಸ್ಥಳೀಯ ತಲ್ಲಣ, ಕರ್ಷಣಗಳನ್ನು ಈ ಬಗೆಯಲ್ಲಿ ಕಾವ್ಯದಲ್ಲಿ ಕಟ್ಟಿಕೊಡುವ ಲಾವಣಿಕಾರರು ಮುಖ್ಯವಾಗಿ ಚರಿತ್ರಕಾರರ ಸಾಲಿನಲ್ಲಿ ನಿಂತು ತಮ್ಮ ಕಾವ್ಯದ ಸಾರ್ಥಕತೆಯನ್ನು ತೋರ್ಪಡಿಸುವುದು ಕಾಣುತ್ತೇವೆ.
ಹುಲಕುಂದ ಲಾವಣಿಕಾರರು
  ಲಾವಣಿ ಕಾವ್ಯ ಪ್ರಕಾರ ಶೃಂಗಾರ ಚಾರಿತ್ರಿಕ ನೆಲೆಯಲ್ಲಿ ಹರಿದು ಬರುತ್ತಿರಬೇಕಾದರೆ ಬ್ರಿಟಿಷರ ದಬ್ಬಾಳಿಕೆ, ಅದಿsಕಾರಶಾಹಿ ವ್ಯವಸ್ಥೆಗೆ ಒಂದು ಬಹುದೊಡ್ಡ ಆಂದೋಲನವಾಗಿ ರೂಪುಗೊಂಡ ‘ಭಾರತ ಸ್ವಾತಂತ್ರ್ಯ ಚಳವಳಿ’ಗೆ ರಾಷ್ಟ್ರೀಯವಾದಿ ಗೀತೆಗಳನ್ನು ರಚಿಸಿ ತಂಡ ಕಟ್ಟಿ ಹಾಡಿದರು. ಭಾರತ ಸ್ವಾತಂತ್ರ್ಯ ಚಳವಳಿ ನಗರದ ವಿದ್ಯಾವಂತರ ಕೆಲವೇ ಕೆಲವರ ಧ್ವನಿಯಾಗಿದ್ದ ಸಂದರ್ಭದಲ್ಲಿ ಈ ಚಳವಳಿಯನ್ನು ಜನಮುಖಿಯಾಗಿಸಲು ಆ ಕಾಲಕ್ಕೆ ತೀವ್ರವಾಗಿ ಆಕರ್ಷಿಸಿದ್ದು ಲಾವಣಿ ಸಾಹಿತ್ಯ. ಲಾವಣಿ ಗೀಗಿ ಪ್ರಕ್ರಿಯೆ ತಂಡಗಳನ್ನು ಹುಟ್ಟು ಹಾಕಿದವು. ಆ ಕಾಲದ ಸ್ವಾತಂತ್ರ್ಯ ಹೋರಾಟದ ನೇತಾರರಿಗೆ ಜೊತೆಯಾಗಿ ನಿಂತವರು ನಮ್ಮ ದೇಸೀ ಕಾವ್ಯ ಪ್ರಭುಗಳು 1930ನೇ ಇಸ್ವಿಯ ಜನೇವರಿ 29ನೇ ತಾರೀಖಿಗೆ ಹುಲಕುಂದಕ್ಕೆ ಬಂದ ವೆಂಕಟರೆಡ್ಡಿ ಹೂಲಿ, ವಾಮನರಾವ್ ಬಿದರಿ ಅವರು ಲಾವಣಿಕಾರರಿಗೆ ಗಾಂದಿsೀಜಿ ವಿಚಾರಗಳನ್ನು ತಿಳಿಸಿ ವಿಧಾಯಕ ಕಾರ್ಯಕ್ರಮಗಳ ಪ್ರಚಾರ ಮಾಡುವಂತೆ ಹುರಿದುಂಬಿಸಿದರು. ಇದರ ಪರಿಣಾಮವಾಗಿ ಹುಲಕುಂದ ಭೀಮಕವಿ ಎಂದೇ ಹೆಸರಾದ ಹುಲಕುಂದದ ಬಸಪ್ಪ ಸಂಗಪ್ಪ ಬೆಟಗೇರಿ ಹಾಗೂ ಹನುಮಪ್ಪ ಬಸಪ್ಪ ಮಿರ್ಜಿ, ಹುಲಕುಂದ ಪಟ್ಟದೇವರು (ಶಿವಲಿಂಗ ಕವಿ) ಸಿದ್ದರಾಯ, ಗಿರಿಮಲ್ಲ, ಸಂಗಯ್ಯ ಮುಂತಾದವರು ರಾಷ್ಟ್ರೀಯ ಪದಗಳನ್ನು ರಚಿಸಿದರು. ಅದೇ ಗ್ರಾಮದ ಗೀಗೀ ಮೇಳ ತಯಾರಾಯಿತು. ‘ಅಝಾದ ಹಿಂದ ಗೀಗೀ ಮೇಳ’ ಎಂಬ ಹೆಸರಿನ ಈ ಮೇಳವು ರಾಷ್ಟ್ರೀಯ ವಿಚಾರಗಳ ಪ್ರಚಾರಕ್ಕಾಗಿ ಕಂಕಣ ಬದ್ದವಾಯಿತು. ಬೆಳಗಾಂವಿ, ಧಾರವಾಡ, ವಿಜಾಪುರ, ಬಳ್ಳಾರಿ, ಕಾರವಾರ, ಸೊಲ್ಲಾಪುರ ಜಿಲ್ಲೆಗಳಲ್ಲಿ ಸಂಚರಿಸಿತು. ಹೀಗೆ ಸ್ವತಂತ್ರ ಮೇಳಗಳು ತಲೆ ಎತ್ತುವ ಮೂಲಕ ಲಾವಣಿ ಗೀತ ಸಾಹಿತ್ಯ ತನ್ನ ವ್ಯಾಪಕತೆಯನ್ನು ಪಡೆದುಕೊಂಡಿತು.
   ನಾನಾ ಮುಖಗಳಿದ್ದ ರಾಷ್ಟ್ರೀಯ ಚಳವಳಿಗೆ ಜನ ಸಾಮಾನ್ಯರನ್ನು ಸಜ್ಜುಗೊಳಿಸಲು ಈ ಲಾವಣಿಕಾರರು ಮುಂದಾಗಿರವದು ಕಂಡು ಬರುತ್ತದೆ. ಇಷ್ಟಲ್ಲದೆ ಅಸ್ಪ್ನೃಶ್ಯತಾ ನಿವಾರಣೆ, ಮದ್ಯಪಾನ ನಿಷೇಧ, ಖಾದಿ ಧರಿಸುವುದು ಇತ್ಯಾದಿ ಸಂಗತಿಗಳನ್ನು ಹಳ್ಳಿಗರಿಗೆ ಮನವರಿಕೆಯಾಗುವಂತೆ ತಿಳಿಸುವಲ್ಲಿ ತಮ್ಮ ಕಾವ್ಯ ಕುಶಲತೆ ಮೆರೆದರು. ಈ ಕಾರ್ಯದಲ್ಲಿ ಕನ್ನಡದಲ್ಲಿ ಅನೇಕ ಲಾವಣಿಕಾರರು ತಮ್ಮ ಹೆಸರು, ಕೀರ್ತಿಗೆ ಆಸೆ ಮಾಡದೆ ಕಾವ್ಯ ಕಟ್ಟಿ ಹಾಡಿದರು. ತೇರದಾಳ ತುಕಾರಾಮ, ಗೋಪಾಳ ದುರದುಂಡಿ, ಮುರಗೋಡ ಕುಬ್ಬಣ್ಣ, ಹುಲಕುಂದ ಬಿsೀಮಕವಿ, ಬಡಚಿ ಲಕ್ಷ್ಮಿಬಾಯಿ, ತುಂಗಳ ಸತ್ಯಪ್ಪ, ಪರಮಾನಂದವಾಡಿ ಮುಲ್ಲಾ, ಕುಡಚಿ ಮಲ್ಲಪ್ಪ, ಕುರ್ತಕೋಟಿ ಕಲ್ಮೇಶ, ಅಪ್ಪಾಜಿರಾವ ಮಹಾರಾಜ ಸರಕಾರ, ಪ್ರಭು, ಬಾಳಗೋಪಾಲ, ಬಿsೀಮಸಿಂಗ, ಯೋಗಣ್ಣ, ರಾಣು ಕುಂಬಣ್ಣಾ, ಶಾಹೀರ ಭೈರಿನಾಯ್ಕ ವಸ್ತಾದಿ ಖಾಜಾಬಾಯಿ ಹನುಮಂತ, ಹುಚಮಲ್ಲಯ್ಯ, ಸಂಗಣ್ಣ ಬಸಣ್ಣ, ಸಂಗಯ್ಯ ಕರಾಡಗೆ, ಸಾತುರಾಮ, ಸಿದ್ದರಾಮ ಮುಂತಾದವರು ದೇಸೀಕಾವ್ಯವನ್ನು ಕಟ್ಟಿ ಹಾಡಿ  ಹೆಸರಾದರು.
     18 ಮತ್ತು 19ನೆಯ ಶತಮಾನದಲ್ಲಿ ಉರ್ದು, ಮರಾಠಿ ಪ್ರಾಬಲ್ಯದ ಕನ್ನಡ ಪ್ರದೇಶದಲ್ಲಿ ಮುಸ್ಲಿಂ ತತ್ತ್ವಪದಕಾರರು ಕನ್ನಡ ತತ್ತ್ವಪದ ಸಾಹಿತ್ಯಕ್ಕೆ ಸಮೃದ್ಧತೆ ತಂದಂತೆ ಕನ್ನಡ ಲಾವಣಿ ಕವಿತೆಗಳನ್ನು ಕಟ್ಟಿ ಹೆಸರಾದುದು ಗಮನಾರ್ಹವಾಗಿದೆ. ‘ಉತ್ತರ ಕರ್ನಾಟಕದ ಸಾಮಾಜಿಕ ಸಂದರ್ಭದಲ್ಲಿ ಹಿಂದೂ ಮುಸ್ಲಿಂ ಬಾಂಧವ್ಯ ಗಮನಾರ್ಹವಾದುದು. ಮೊಹರಂ ಪದಗಳನ್ನು ರಚಿಸಿದ ಹಿಂದೂಗಳಿರುವಂತೆಯೇ ಲಾವಣಿ ಮತ್ತು ತತ್ತ್ವಪದಗಳನ್ನು ರಚಿಸಿರುವ ಮುಸ್ಲಿಂ ಕವಿಗಳಿದ್ದಾರೆ. ಈ ಕವಿಗಳು ಕನ್ನಡ ಭಾಷೆ ಮತ್ತು ವಿಷಯ ವಸ್ತುವಿನ ಮೇಲೆ ಗಳಿಸಿಕೊಂಡಿರುವ ಪ್ರೌಡಿsಮೆ ಆಗಾಧವಾದುದು. ವೇದಾಂತ ಪುರಾಣಗಳ ಬಗೆಗಿನ ನಿರರ್ಗಳ ನಿರೂಪಣೆ, ಸಮೃದ್ಧ ಪಾರಿಭಾಷಿಕ ಪದಗಳ ಬಳಕೆ ಅಚ್ಚರಿ ಮೂಡಿಸುವಂತಿವೆ ಎನ್ನುತ್ತಾರೆ ಡಾ.ಬಸವರಾಜ ಮಲಶೆಟ್ಟಿ ಅವರು. ಶಿಶುನಾಳ ಶರೀಫ(1840), ಬೀಬಿ ಇಂಗಳಗಿಯ ಶೇಕ  ಮಕ್ತಮಶಾ(1850), ಹಸನಸಾಬ(1858) ಮಂಗಲಗಿ ನನ್ನ ಸಾಹೇಬ(1874), ನರೋಣಾದ ಹೈದರಲಿ(1877), ಕೋರಳ್ಳಿಯ ಮೌಲಾಲಿ (1884), ಡೋಣುರದ ಬಸುಹಸನ(1888), ಯಾದವಾಡದ ಹುಸೇನಿ(1896), ಬೀಬಿ ಇಂಗಳಗಿಯ ಲಾಳೇಶ (1896) ಮಹಮ್ಮದ ಇಮಾಮಶಾ ರಾಣಿಬೆನ್ನೂರಿನ ಸಮ್ಮದ ಸಾಹೇಬ(1899), ಬಸವನ ಬಾಗೇವಾಡಿಯ ಚಾಂದ ಹುಸೇನಿ(1900), ದೇಗಾಂವದ ಇಮಾಮಸಾಹೇಬ(1906), ಚಾಂದಕವಟೆಯ ಗುಡಲಾಲ(1906), ಸಾವಳಗಿ ನಬೀಸಾಬ(1906) ಇಂಗಳೇಶ್ವರ ಲಾಲಸಾಬ(1922) ರಾಯಬಾಗದ  ಮೀರಾಸಾಹೇಬ(1922), ಹಲಸಂಗಿ ಖಾಜಾಬಾಯಿ(1924)... ಹೀಗೆ ಬೆಳವಲ ನಾಡಿನಲ್ಲಿ ಲಾವಣಿ ಕ್ಷೇತ್ರದಲ್ಲಿ ಹೆಸರಾದ ಈ  ಲಾವಣಿಕರರು ಕಾವ್ಯ ಸೃಷ್ಟಿಯಲ್ಲಿ ಗಮನಾರ್ಹ ಸಾಧನೆಯಿಂದ ಗುರುತಿಸಿಕೊಂಡಿರುತ್ತಾರೆ.
    ಆಧುನಿಕ ಕನ್ನಡ ಕಾವ್ಯವನ್ನು ರೂಪಿಸುವಲ್ಲಿ ಲಾವಣಿಗಳು ಮಹತ್ವದ ಪಾತ್ರವಹಿಸಿದವು. ಲಾವಣಿಗಳಲ್ಲಿನ ಕಲ್ಪನಾಶಕ್ತಿ, ಭಾವ ಸಂಪತ್ತು, ಲಯ ಪ್ರಾಸಗಳ ಗತ್ತು ಗಮ್ಮತ್ತು ನಮ್ಮ ಕವಿಗಳನ್ನು ಆಕರ್ಷಿಸಿತು. ಆ ಕಾಲಕ್ಕೆ ರೂಪಿತವಾದ ‘ಭಾವಗೀತ’ ಪ್ರಕಾರಕ್ಕೆ ಸರಿದೊರೆಯಾಗಿ ನಿಂತು ಲಾವಣಿಗಳು ತಮ್ಮ ಅಸ್ತಿತ್ವ ಪ್ರಕಟಿಸಿದವು. ಲಾವಣಿಗಳಿಗೂ ಭಾವಗೀತೆಗಳಿಗೂ ಸಂಬಂಧವುಂಟು. ರಗಳೆಯ ಲಯ, ಅಂಶೀ ಷಟ್ಪದಿ ಅನೇಕ ಲಾವಣಿ ಮತ್ತು ಭಾವಗೀತಗಳ ಜೀವಾಳ. ಆಧುನಿಕ ಮರಾಠಿ ಸಾಹಿತ್ಯದ ಭಾವಗೀತಕಾರರು ಲಾವಣಿಯ ಪ್ರೇರಣೆಯಿಂದ ಲಾವಣಿ ಧಾಟಿಯ ಭಾವಗೀತೆಗಳನ್ನು ರಚಿಸಿದಂತೆ ಬೆಟಗೇರಿ ಕೃಷ್ಣಶರ್ಮರು, ಮಧುರಚೆನ್ನ, ಬೇಂದ್ರೆ ಮತ್ತು ಶ್ರೀಧರ ಖಾನೋಳಕರ ಅವರು ಲಾವಣಿ ಗತ್ತಿನ ಅತ್ಯುತ್ತಮ ಭಾವಗೀತೆಗಳನ್ನು ರಚಿಸಿದ್ದಾರೆ. ಹೀಗೆ ಲಾವಣಿಕಾರರು, ಅನಂತರ ಭಾವಗೀತಕಾರರು ಮಾಡಿದ ರಚನೆಗಳು ಮೌಲಿಕವಾಗಿವೆ. ಹೀಗೆ ಹೊಸ ಕಾವ್ಯದ ಹುಟ್ಟಿಗೆ ಕಾರಣವಾದ ಲಾವಣಿ ಸಾಹಿತ್ಯ ಜನಸಾಮಾನ್ಯರ ನೆಲೆಯಿಂದ ಹೊರಟು ಕನ್ನಡ ಕಾವ್ಯ ಕ್ಷೇತ್ರವನ್ನು ಹೊಸ ಸಾಧ್ಯತೆಗಳೊಂದಿಗೆ ವಿಸ್ತರಿಸಿತು.
                                                       -ಡಾ.ಪ್ರಕಾಶ ಗ.ಖಾಡೆ
ವಿಳಾಸ: ಡಾ.ಪ್ರಕಾಶ ಗ.ಖಾಡೆ,ಸೆಕ್ಟರ್ ನಂ. 63,ನವನಗರ,ಬಾಗಲಕೋಟ  ,ಮೊ.9845500890